ग्रन्थनाम [Book Name] - ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು
[Kavirajamarga Mattu Kannada Jagattu]
लेखकः [Author] - के.वी. सुब्बन्ना [K V Subbanna]
प्रकाशकः [Publisher] - अक्षरा प्रकाशनम् [Akshara Prakashana]
भाषा [Language] - कन्नड [ಕನ್ನಡ]
विचारः [Topic] -
आकारः [Size] पुटाः [Pages] -
ग्रन्थविवरणम् [Description] - ‘ಕವಿರಾಜಮಾರ್ಗ’ವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. ‘ಕವಿರಾಜಮಾರ್ಗ’ ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ. ‘ಕಾವೇರಿಯಿಂದಂ-ಆ - ಗೋದಾವರಿವರಂ - ಇರ್ದ - ನಾಡು - ಅದು ಆ ಕನ್ನಡದೊಳ್ಭಾವಿಸಿದ ಜನಪದಂ’. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು ‘ಭಾವಿತ’ವಾದದ್ದು; ‘ಕನ್ನಡ’ ವೆಂಬುದರ ಒಳಗಡೆ -- ಆ ಚಿಪ್ಪಿನ ಒಳಗೆ ಎನ್ನಿ -- ‘ಭಾವಿತ’ ವಾದದ್ದು. ಅಂದರೆ, ‘ಕನ್ನಡ’ ವೆಂಬುದು ಒಂದು ಚಿತ್-ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್ - ಜಗತ್ತಿನೊಳಗೆ ಮೈದಾಳಿದ್ದಾಗಿ ಅನಂತರ ನಿರ್ಮಿತಗೊಂಡಿದೆ. ಮತ್ತು ಇದು, ‘ವಸುಧಾ-ವಲಯ-ವಿಲೀನ, ವಿಶದ-ವಿಷಯ-ವಿಶೇಷಂ’. ವಸುಧಾ (ಭೂಮಿ) ಎನ್ನುವುದು ಅನಂತ ಬ್ರಹ್ಮಾಂಡದೊಳಗಿನ ಒಂದು ‘ವಲಯ’ ಅಷ್ಟೇ; ಮತ್ತು ‘ಕನ್ನಡ’ ವೆಂಬ ‘ವಿಷಯ’ (ನಾಡು) ವು ಆ ವಸುಧಾವಲಯದಲ್ಲಿ ‘ವಿಲೀನ’ ವಾಗಿದೆ, ಸಮರಸವಾಗಿ ಬೆರೆತುಕೊಂಡಿದೆ. ಹಾಗೆಂದಮಾತ್ರಕ್ಕೆ ಇದು ಸ್ವಂತಿಕೆಯ ಚಹರೆಯಿಲ್ಲದೆ ವಸುಧೆಯಲ್ಲಿ ಗುರುತು ಸಿಗದಂತೆ ಮುಳುಗಿಹೋದದ್ದಲ್ಲ; ತನ್ನದೇ ‘ವಿಶೇಷ’ (ವೈಶಿಷ್ಟ್ಯ) ಇರುವ ನಾಡು. ಅಷ್ಟೇ ಅಲ್ಲ -- ಇದು ‘ವಿಶದ’ ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, ‘ವಸುಧಾವಲಯ ವಿಲೀನ, ವಸುಧೆಯ ಒಳಗಿನ ಒಂದು ಕಿರುಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ ‘ಕನ್ನಡ’ ದ ಇಂಥ ಪ್ರತಿಮೆಯನ್ನು ‘ಕವಿರಾಜಮಾರ್ಗ’ವು ಕಂಡರಿಸಿಟ್ಟಿದೆ.